Friday, April 1, 2022

ಮನುಷ್ಯಜಾತಿ ತಾನೊಂದೆ ವಲಂ...

ಆದಿಕವಿ ಪಂಪನೇ ಹೀಗೆ ಹೇಳಿದ್ದಾನೆ, ಆದ್ದರಿಂದ ಮನುಷ್ಯರೆಲ್ಲ ಒಂದೇ, ನಮ್ಮಲ್ಲಿ ಭೇದಭಾವ ಸಲ್ಲ ಎಂಬರ್ಥದ ಅಭಿಪ್ರಾಯವೊಂದನ್ನು ಫೇಸ್ಬುಕ್ಕಿನಲ್ಲಿ ನೋಡಿದೆ.  ಈ ಅಭಿಪ್ರಾಯದ ಬಗೆಗೆ ನಮ್ಮ ತಕರಾರಿಲ್ಲ; ಅಥವಾ ಮೇಲಿನ ಮಾತುಗಳು ಪಂಪನವೇ ಎಂಬಲ್ಲಿ ಕೂಡ ತಕರಾರಿಲ್ಲ.  ಆದರೆ ಮೇಲಿನ ಮಾತುಗಳು ಈ ಅಭಿಪ್ರಾಯವನ್ನು ಸೂಚಿಸುತ್ತವೆ ಎಂಬ 'ಮೂಢನಂಬಿಕೆ'ಯ ಬಗೆಗಷ್ಟೇ ತಕರಾರು.

ಇದು ಹೊಸದೇನಲ್ಲ.  ಪಂಪ "ಮನುಷ್ಯರೆಲ್ಲ ಒಂದೇ" ಎಂದೇ ಹೇಳಿದ್ದಾನೆ ಎಂಬ ಅಭಿಪ್ರಾಯ ಬಹಳವಾಗಿ ಚಾಲ್ತಿಯಲ್ಲಿದೆ.  ಕೆಲವು ಹಿರಿಯ ವಿಮರ್ಶಕರು (ತಿಳಿಯದವರೇನಲ್ಲ), ಅದಾವುದೋ ತಮಗಷ್ಟೇ ತಿಳಿದಿರಬಹುದಾದ ಕಾರಣಕ್ಕೆ ಇಂಥದ್ದೊಂದು ವ್ಯಾಖ್ಯಾನವನ್ನು ಹರಿಯಬಿಟ್ಟಿದ್ದಾರೆ, ಸಾವಿರ ವರ್ಷದ ಹಿಂದೆಯೇ ಜಾತಿಪದ್ಧತಿಯನ್ನು ವಿರೋಧಿಸಿದ ಪ್ರಗತಿಪರಕವಿಯದೊಂದು ಇಮೇಜ್ ಸಿದ್ಧವಾಗಿಬಿಟ್ಟಿದೆ, ಮತ್ತು ಪಂಪನಿಗೆ ತಾನು ಕನಸುಮನಸಿನಲ್ಲಿಯೂ ಊಹಿಸಿರದ ಜಾತ್ಯತೀತ ವಿಶ್ವಮಾನವಕವಿಯ ಪಟ್ಟ ದಕ್ಕಿಬಿಟ್ಟಿದೆ.  ಜಾತಿಯನ್ನು ಖಂಡಿಸುವವರು (ಅದಕ್ಕಾಗಿ ಬ್ರಾಹ್ಮಣರ ಮೂತಿ ದೆಬ್ಬುವವರು), ಪಂಪನನ್ನು ಓದಿಕೊಂಡಿದ್ದೇನೆಂದು ತೋರಿಸಿಕೊಳ್ಳುವವರು, ಪಂಪನನ್ನು ಅರೆಬರೆ ಓದಿಕೊಂಡವರು, ಪಂಪನ ಹೆಸರನ್ನು ಎಲ್ಲೋ ಕೇಳಿದವರು, ಪುಡಾರಿಗಳು, ಪುಡಿಸಾಹಿತಿಗಳು, ಧಡಿಸಾಹಿತಿಗಳು, ಮಾನವತಾವಾದದ ಉದ್ಯಮವನ್ನು ನಡೆಸುವವರು ಎಲ್ಲರಿಗೂ ಪಂಪನ ಇದೊಂದು ವಾಕ್ಯ, ಅಲ್ಲಲ್ಲ, ವಾಕ್ಯಖಂಡ ಬಹಳ ಅನುಕೂಲಕರವಾದ ಕೈಹಿಡಿಯಾಗಿ ಪರಿಣಮಿಸಿಬಿಟ್ಟಿದೆ.  ಇದೊಂದು ಸಾಲನ್ನು ಪಂಪನ 'ವಿಶ್ವಮಾನವದೃಷ್ಟಿ'ಗೆ ದ್ಯೋತಕವಾಗಿ ಎಲ್ಲೆಲ್ಲಿ ಎಷ್ಟೆಷ್ಟು ಹೇಗೆಹೇಗೆ ಬರೆದರೂ ಸಾಲದು.  ಅಷ್ಟೇಕೆ, ಸ್ವತಃ ಕನ್ನಡಸಾಹಿತ್ಯಪರಿಷತ್ತೇ ತನ್ನ ಪುಸ್ತಕಸರಣಿಯಲ್ಲಿ ಇದನ್ನು ಘೋಷವಾಕ್ಯವಾಗಿ ಮುದ್ರಿಸಿಕೊಂಡಿದೆ.  ಹೀಗಾಗಿ ಈ ವಾಕ್ಯದ ಹಿಂದುಮುಂದು ತಿಳಿಯದೇ, ಈ ಮಾತಿನ ಮೂಲಕ "ಮನುಷ್ಯಜಾತಿ ಒಂದೇ" ಎಂಬ ಏಕತ್ವದ ಸಂದೇಶವನ್ನು ಪಂಪ ಸಾರುತ್ತಿದ್ದಾನೆ ಎಂದು ಮುಗ್ಧವಾಗಿ ನಂಬಿದವರೂ ಕಡಿಮೆಯಿಲ್ಲ.

ಇರಲಿ, ಕೆಟ್ಟ ಅಪಾರ್ಥಗಳಿಗಿಂತ ಒಳ್ಳೆಯ ಅಪಾರ್ಥ ಯಾವಾಗಲೂ ಒಳ್ಳೆಯದೇ.  ಈ ವಾಕ್ಯದ ಅಭಿಪ್ರಾಯವೇನೇ ಇರಲಿ, ಮನುಷ್ಯಜಾತಿಯೊಂದೇ ಎಂಬುದರಲ್ಲಿ ಎರಡು ಮಾತಿಲ್ಲವೇ ಇಲ್ಲ.  ಬಸವಣ್ಣನವರೇ ಹೇಳಿಲ್ಲವೇ - "ನೆಲನೊಂದೆ ಹೊಲಗೇರಿ ಶಿವಾಲಯಕೆ"; ಅದಕ್ಕೆ ಸರ್ವಜ್ಞನೂ ದನಿಗೂಡಿಸಿದ್ದಾನಲ್ಲ - "ನಡೆವುದೊಂದೇ ಭೂಮಿ ಕುಡಿವುದೊಂದೇ ನೀರು ಸುಡುವಗ್ನಿಯೊಂದೆ ಇರುತಿರಲು ಕುಲಗೋತ್ರ ನಡುವೆ ಎತ್ತಣದು"; ಕನಕದಾಸರೂ ಅದನ್ನೇ ಹೇಳುತ್ತಾರೆ - "ಕುಲಕುಲಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರಾ?"  ಅಷ್ಟೇಕೆ ಪಂಪನೂ ಕುಲಾಚಾರಗಳನ್ನು ಗೌರವಿಸಿದರೂ ಅದು ಅತಿರೇಕಕ್ಕೆ ಹೋದರೆ ಸಹಿಸುವವನಲ್ಲ.   ಉದಾಹರಣೆಗೆ ವಿಕ್ರಮಾರ್ಜುನವಿಜಯದಲ್ಲಿ ಕರ್ಣನ ಬಾಯಲ್ಲಿ ಆತ ಹೇಳಿಸುವ ಮಾತುಗಳನ್ನು ಕೇಳಿ:

"ಕುಲಮನೆ ಮುನ್ನಮುಗ್ಗಡಿಪಿರೇಂ ಗಳ, ನಿಮ್ಮ ಕುಲಂಗಳಾಂತು ಮಾರ್ಮಲೆವನನಟ್ಟಿ ತಿಂಬುವೆ? ಕುಲಂ ಕುಲಮಲ್ತು - ಚಲಂ ಕುಲಂ, ಗುಣಂ ಕುಲಂ, ಅಭಿಮಾನಮೊಂದೆ ಕುಲಂ, ಅಣ್ಮು ಕುಲಂ.  ಬಗೆವಾಗಳ್ ಈಗಳ್ ಈ ಕಲಹದೊಳಣ್ಣ ನಿಮ್ಮ ಕುಲವಾಕುಲಮಂ ನಿಮಗುಂಟುಮಾಡುಗುಂ" (ಕುಲವನ್ನೇ ಎತ್ತೆತ್ತೆತ್ತಿ ಆಡುವಿರಲ್ಲ, ನಿಮ್ಮ ಕುಲಗಳೇನು ಏರಿಬರುವ ಶತ್ರುಗಳನ್ನು ಅಟ್ಟಿ ತಿನ್ನುತ್ತವೆಯೇ?  ಕುಲ ಕುಲವಲ್ಲಪ್ಪಾ, ಛಲ ಕುಲ, ಗುಣ ಕುಲ, ಅಭಿಮಾನವೊಂದೇ ಕುಲ, ವೀರ್ಯವೇ ಕುಲ.  ನೋಡಿದರೆ ಈಗ ಈ ಕಲಹದಲ್ಲಿ, ಅಣ್ಣಾ, ನಿಮ್ಮ ಕುಲವೇ ನಿಮಗೆ ಆಕುಲವನ್ನು (ದುಃಖವನ್ನು) ತಂದೀತು).

ಪಂಪನ ಶಾಸ್ತ್ರದೃಷ್ಟಿಯೇನೇ ಇರಲಿ, ಮೇಲೆ ಕರ್ಣ ಹೇಳುವ ಮಾತು ಕೆಲಮಟ್ಟಿಗೆ ಪಂಪನ ಜೀವನದೃಷ್ಟಿಯನ್ನೂ ಧ್ವನಿಸುತ್ತದೆಂದಿಟ್ಟುಕೊಳ್ಳಬಹುದು. ಮಾನವಧರ್ಮವೇ ಸರ್ವಶ್ರೇಷ್ಠವೆಂಬ ಮಾತಿನಲ್ಲಿ ಅನುಮಾನವಿಲ್ಲ; ಮಾನವತೆಯೆಂಬುದು ದಯೆ-ಕರುಣೆ ಎಂದು ಅರ್ಥೈಸುವುದಾದರೆ ಸ್ವತಃ ಜೈನಮತಾವಲಂಬಿಯಾದ ಪಂಪನೂ ಮಾನವಧರ್ಮದಲ್ಲಿ ನಂಬಿಕೆಯಿಟ್ಟವನೇ ಎಂದರೂ ತಪ್ಪಾಗಲಾರದು.  ಆದರೆ ಪಂಪನ 'ಮಾನವತೆ' ನಮ್ಮ ಆಧುನಿಕಬುದ್ಧಿಜೀವಿಗಳ ಬ್ರಾಂಡಿನ ಮಾನವತೆಯಲ್ಲ.  ಅವನ ಮಾನವತೆಯು ಜಾತಿ-ಕುಲ-ನಂಬಿಕೆಗಳಿಗೆ, ಅದರಿಂದ ಹೊಮ್ಮಬಹುದಾದ ಸಹಜವಾದ ಹೆಮ್ಮೆಗೆ, ಸ್ವಾಭಿಮಾನಕ್ಕೆ, ಶ್ರೇಷ್ಠತೆಯ ಪ್ರಜ್ಞೆಗೆ ಎಂದೂ ವಿರುದ್ಧವಾದದ್ದಲ್ಲ.  ಅಷ್ಟೇಕೆ?  ಸ್ವತಃ ಪಂಪ ಧರ್ಮದಿಂದ ಜೈನನಾದರೂ ಜಾತಿಯಿಂದ ಬ್ರಾಹ್ಮಣ, ಮತ್ತು ಅವನಿಗೆ ತನ್ನ ಜಾತಿಯ ಬಗ್ಗೆ ಅಪಾರವಾದ ಹೆಮ್ಮೆಯಿದೆ.  'ವಿಪ್ರಶ್ರೇಷ್ಠ'ನಾದ ತನ್ನ ತಂದೆ ಅಭಿರಾಮದೇವರಾಯ (ಭೀಮಪಯ್ಯ)ನು ಜೈನಧರ್ಮವನ್ನು ಪರಿಗ್ರಹಿಸಿದ ಘಟನೆಯನ್ನು ಹೆಮ್ಮೆಯಿಂದ ವಿವರಿಸುತ್ತಾ ಪಂಪ ಹೀಗೆ ಹೇಳುತ್ತಾನೆ:

ಜಾತಿಯೊಳೆಲ್ಲಮುತ್ತಮದ ಜಾತಿಯ ವಿಪ್ರಕುಲಂಗೆ ನಂಬಲೇ

ಮಾತೊ ಜಿನೇಂದ್ರಧರ್ಮಮೆ ವಲಂ ದೊರೆ ಧರ್ಮದೊಳೆಂದು ನಂಬಿ ತ

ಜ್ಜಾತಿಯನುತ್ತರೋತ್ತರಮೆ ಮಾಡಿ ನೆಗೞ್ಚಿದನಿಂತಿರಾತ್ಮವಿ

ಖ್ಯಾತಿಯನಾತನಾತನ ಮಗಂ ನೆಗೞ್ದಂ ಕವಿತಾಗುಣಾರ್ಣವಂ

 - ವಿಕ್ರಮಾರ್ಜುನವಿಜಯ 14/48

(ಜಾತಿಗಳಲ್ಲಿ ಉತ್ತಮಜಾತಿಯವನಾದ ವಿಪ್ರನಿಗೆ ಧರ್ಮಗಳಲ್ಲಿ ಉನ್ನತವಾದ ಜಿನೇಂದ್ರಧರ್ಮವೇ ಸರಿಯಾದ ಧರ್ಮವೆಂದು ನಂಬಿ, ಅದರಿಂದ ಆ (ಬ್ರಾಹ್ಮಣ)ಜಾತಿಯನ್ನೇ ಉತ್ತರೋತ್ತರವನ್ನಾಗಿಸಿ (ತನ್ನ ಜಾತಿಯ ಪೆರ್ಮೆಯನ್ನು ಇನ್ನೂ ಹಿರಿದಾಗಿಸಿ) ತನ್ನ ಖ್ಯಾತಿಯನ್ನೂ ಹೆಚ್ಚಿಸಿಕೊಂಡನು; ಆತನ (ಅಂತಹ ಅಭಿರಾಮದೇವರಾಯನ) ಮಗನೇ ಈ ಕವಿತಾಗುಣಾರ್ಣವನಾದ ಪಂಪ)

ಮುಂದುವರೆದು ತನ್ನ ಬಗ್ಗೆ ಪಂಪ ಹೇಳಿಕೊಳ್ಳುವ ಪರಾಕುಗಳನ್ನೂ ನೋಡಿ - 

ಪಂಪಂ ಧಾತ್ರೀವಳಯನಿ

ಳಿಂಪಂ ಚತುರಂಗಬಳಭಯಂಕರಣಂ ನಿ

ಷ್ಕಂಪಂ ಲಲಿತಾಲಂಕರ

ಣಂ ಪಂಚಶರೈಕರೂಪನಪಗತಪಾಪಂ

 - ವಿಕ್ರಮಾರ್ಜುನವಿಜಯ 14/49

(ಪಂಪ, ಧಾತ್ರೀವಳಯನಿಳಿಂಪ (ಭೂಲೋಕದ ದೇವತೆ - ಭೂಸುರ - ಬ್ರಾಹ್ಮಣ), ಚತುರಂಗಬಲಭಯಂಕರ, ಎಂದೂ ನಡುಗದವನು, ಲಲಿತವಾಗಿ ಅಲಂಕರಿಸಿಕೊಂಡ ಮನ್ಮಥರೂಪ, ಪಾಪರಹಿತ).

ಮತ್ತೆ, ತನ್ನ ದೊರೆಯಾದ ಅರಿಕೇಸರಿಯು ತನಗೆ ಮೆಚ್ಚುಗೆಯಾಗಿ ಕೊಡಮಾಡಿದ ಧರ್ಮಪುರವೆಂಬ ಅಗ್ರಹಾರವನ್ನು ಪಂಪನು ವರ್ಣಿಸುವ ಬಗೆ ನೋಡಿ:

ದೆಸೆ ಮಖಧೂಮದಿಂ ದ್ವಿಜರ ಹೋಮದಿನೊಳ್ಗೆಱೆ ಹಂಸಕೋಕಸಾ

ರಸಕಳನಾದದಿಂದೊಳಗೆ ವೇದನಿನಾದದಿನೆತ್ತಮೆಯ್ದೆ ಶೋ

ಭಿಸೆ ಸುರಮಥ್ಯಮಾನವನಧಿಕ್ಷುಭಿತಾರ್ಣವಘೋಷದಂತೆ ಘೂ

ರ್ಣಿಸುತಿರಲೀ ಗುಣಾರ್ಣವನ ಧರ್ಮದ ಧರ್ಮವುರಂ ಮನೋಹರಂ

 - ವಿಕ್ರಮಾರ್ಜುನವಿಜಯ 14/57

(ದಿಕ್ಕುಗಳು ಬ್ರಾಹ್ಮಣರ ಹೋಮಧೂಮದಿಂದಲೂ, ಒಳ್ಳೆಯ ಕೆರೆಗಳು ಹಂಸಕೋಕಸಾರಸಪಕ್ಷಿಗಳ ಕಳಕಳನಾದದಿಂದಲೂ, ಊರಿನ ಒಳಭಾಗವು ವೇದನಿನಾದದಿಂದಲೂ ಶೋಭಿಸುತ್ತಿರಲು, ಗುಣಾರ್ಣವನ ಧರ್ಮದ ಈ ಧರ್ಮಪುರವು ದೇವತೆಗಳಿಂದ ಕಡೆಯಲ್ಪಟ್ಟ ಸಮುದ್ರದಂತೆ ಘೂರ್ಣಿಸುತ್ತಾ ಮನೋಹರವಾಗಿತ್ತು) 

ಇದನ್ನೋದಿ ಪಂಪನಿಗೆ ಬ್ರಾಹ್ಮಣ್ಯದ, ಶ್ರೇಷ್ಠತೆಯ ವ್ಯಸನವಿತ್ತೆಂದು ನಾನಂತೂ ಹುಯಿಲೆಬ್ಬಿಸುವುದಿಲ್ಲ.  "ಮನುಷ್ಯಜಾತಿ ತಾನೊಂದೆವಲಂ" ಎಂಬ ಅರ್ಧವಾಕ್ಯವನ್ನು ಹಿಡಿದು ಪಂಪನನ್ನು ಆಧುನಿಕ ಬ್ರಾಂಡ್ ಮಾನವತಾವಾದಿಯಾಗಿಸಿ ಮೆರೆಸಿದವರು ಈಗ ಇದನ್ನೋದಿ ನಿಲುವು ಬದಲಿಸಿಕೊಂಡರೆ, ಪಂಪನ 'ಶ್ರೇಷ್ಠತೆಯ ವ್ಯಸನದ ಬಗ್ಗೆ, ಎದ್ದು ಕಾಣುವ 'ಬ್ರಾಹ್ಮಣ್ಯ'ದ ಬಗ್ಗೆ ಹುಯಿಲೆಬ್ಬಿಸಿದರೆ ನಾನು ಪಂಪನನ್ನು ರಕ್ಷಿಸಲೂ ಹೋಗುವುದಿಲ್ಲ.  ಏಕೆಂದರೆ ಸ್ವಪ್ರಶಂಸೆ ಪ್ರಾಚೀನಕವಿಗಳ ಶೈಲಿಯೇ ಆಗಿದೆ.  ಅದು ತಪ್ಪೂ ಅಲ್ಲ, ಮತ್ತು ಪಂಪನಂತಹ ಸಿದ್ಧಕವಿಗಳಿಗೆ ಅದು ಕೇವಲ ವ್ಯಸನವೂ ಅಲ್ಲ.  ಆದ್ದರಿಂದ ಅದರ ವೈಖರಿಯನ್ನು ಆಸ್ವಾದಿಸುತ್ತಾ ತಲೆದೂಗುತ್ತೇನಷ್ಟೇ.  ಬ್ರಾಹ್ಮಣ್ಯದ ಹೆಮ್ಮೆ ಪಂಪನಿಗಿರಬಹುದು, ಆದರೆ ನಮ್ಮ ಹೆಮ್ಮೆ ಪಂಪನ ಬ್ರಾಹ್ಮಣ್ಯಲ್ಲ, ಸ್ವತಃ ಪಂಪನೇ.

ಇರಲಿ, ಇಲ್ಲಿ ವಿವರಿಸಹೊರಟದ್ದು "ಮನುಷ್ಯಜಾತಿ ತಾನೊಂದೆ ವಲಂ" ಎಂಬ ಸಾಲನ್ನಷ್ಟೇ?  ಇದು ಬರುವುದು ಆದಿಪುರಾಣದಲ್ಲಿ, ಭರತಚಕ್ರವರ್ತಿಯ ರಾಜ್ಯಭಾರವನ್ನು ವರ್ಣಿಸುವ ಹದಿನೈದನೆಯ ಆಶ್ವಾಸದಲ್ಲಿ.  ರಾಜ್ಯದಲ್ಲಿ ತಂತಮ್ಮ ಜಾತಿಧರ್ಮಗಳನ್ನು ನಿಷ್ಠೆಯಿಂದ ಪಾಲಿಸದವರನ್ನು ಬೇರಿರಿಸಿ, ಪಾಲಿಸುವವರನ್ನು ಸನ್ಮಾನಿಸುವ ಮೂಲಕ ಧರ್ಮವ್ರತಗಳನ್ನು ಬಿಟ್ಟವರೂ ಮತ್ತೆ ಅದನ್ನು ಹಿಡಿಯುವಂತೆ ಮಾಡುತ್ತಿದ್ದ ಎಂದು ವಿವರಿಸುವ ಭಾಗ.  ಹೀಗೆ ಸ್ವಧರ್ಮವ್ರತಗಳಲ್ಲಿ ನಿರತರಾದ ಕೃಷಿ, ವಾಣಿಜ್ಯ, ಶಿಲ್ಪ, ಮೊದಲಾದ ಕಸುಬುದಾರರನ್ನೂ, ಶ್ರಾವಕರನ್ನೂ, ಉಪಾಸನೆ ಅಧ್ಯಯನ ಅಧ್ಯಾಪನ ಮೊದಲಾದವುಗಳಲ್ಲಿ ನಿರತರಾದ ಬ್ರಾಹ್ಮಣರನ್ನೂ ಯಾವಯಾವ ರೀತಿ ಸನ್ಮಾನಿಸುತ್ತಿದ್ದನೆಂದು ವಿವರಿಸುವ ಈ ಭಾಗದಲ್ಲಿ, ಬ್ರಾಹ್ಮಣರನ್ನು ಕುರಿತು ಬರುವ ಮಾತುಗಳು ಹೀಗಿವೆ:

"ಉಪಾಸಕಾಧ್ಯಯನಾಧ್ಯಾಪನಾನಂತರಂ ಸಕಳಶಾಸ್ತ್ರಂಗಳನೋದುವೋದಿಸುವ ನೆನೆವ ಬರೆವ ಪರಮಸ್ವಾಧ್ಯಾಯಮುಂ, ಪಂಚಾಣುವ್ರತಾದಿಪ್ರವರ್ತನಸ್ವಭಾವಸಂಯಮಮುಮನ್ ಅನಶನವೃತ್ಯಾದಿ ತಪೋನುಷ್ಠಾನಮುಂಬೆರಸು ಆರ್ಯಷಟ್ಕರ್ಮಂಗಳಂ ನಿಮಗಿವು ಕುಲಾಚಾರಂಗಳೆಂದಱಿಯೆ ಪೇೞ್ದು ಕೈಕೊಳಿಸಿ,

ಆಱುಂ ವೃತ್ತಿಗಳನಿವಂ

ಮೀಱಿದರಲ್ಲರ್ ದ್ವಿಜನ್ಮರೀವೃತ್ತಿಗಳಿಂ

ಬೇಱಾದರ್ ದ್ವಿಜರುಂತೇಂ

ಬೇಱುಂಟೆ ಮನುಷ್ಯಜಾತಿ ತಾನೊಂದೆ ವಲಂ"

 - ಆದಿಪುರಾಣ 15/14

ಇಲ್ಲಿ ಬರುವುದು "ಮನುಷ್ಯಜಾತಿ ತಾನೊಂದೆ ವಲಂ" ಎಂಬ ಮಾತು.  ಇದರರ್ಥ ಸ್ಥೂಲವಾಗಿ ಹೀಗೆ:

ಉಪಾಸನೆ, ಅಧ್ಯಯನ, ಅಧ್ಯಾಪನ, ಶಾಸ್ತ್ರಗಳನ್ನು ಓದುವುದು, ಓದಿಸುವುದು, ಚಿಂತಿಸುವುದು, ಬರೆಯುವುದು ಮೊದಲಾದ ಚಟುವಟಿಕೆಗಳನ್ನೂ, ಪಂಚಾಣುವ್ರತವೇ ಮೊದಲಾದ ಸಂಯಮವನ್ನೂ, ಉಪವಾಸವೇ ಮೊದಲಾದ ತಪೋನುಷ್ಠಾನಗಳಿಂದ ಕೂಡಿದ ಆರ್ಯರ ಆರು ಕರ್ಮಗಳನ್ನೂ "ನಿಮಗಿದು ಕುಲಾಚಾರ" ಎಂದು ತಿಳಿಯಹೇಳಿ, "ಈ ಆರು ವೃತ್ತಿಗಳನ್ನು ದ್ವಿಜರು (ಬ್ರಾಹ್ಮಣರು) ಎಂದಿಗೂ ಮೀರುವುದಿಲ್ಲ, ಏಕೆಂದರೆ ಈ ವೃತ್ತಿಗಳೇ ಅವರನ್ನು ಇತರರಿಂದ ಬೇರಾಗಿಸಿರುವುದು (ವಿಶಿಷ್ಟವಾಗಿಸಿರುವುದು).  ಅದು ಬಿಟ್ಟರೆ ಅವರು ಕೇವಲ ಮನುಷ್ಯಜಾತಿ ಒಂದೇ ಆಗಿ (ಮನುಷ್ಯಜಾತಿಯಷ್ಟೇ ಆಗಿ) ಉಳಿಯುತ್ತಾರಲ್ಲವೇ? (ಅವರನ್ನು ದ್ವಿಜರೆನ್ನಲಾಗುತ್ತದೆಯೇ?)

ಎಂದರೆ ಮನುಷ್ಯಜಾತಿ ಒಂದು ಪದರ, ಅದರ ಮೇಲೆ ದ್ವಿಜರು ತಮ್ಮ ಈ ಷಟ್ಕರ್ಮಗಳಿಂದ ಎರಡನೆಯ ಜನ್ಮ ತಳೆಯುತ್ತಾರೆ, ಉಳಿದ ಮನುಷ್ಯಜಾತಿಯಿಂದ ಒಂದು ಮೆಟ್ಟಿಲು ಮೇಲೇರುತ್ತಾರೆ.  ಈ ಕರ್ಮಗಳನ್ನು ಬಿಟ್ಟರೆ ದ್ವಿಜತ್ವವನ್ನು ಕಳೆದುಕೊಂಡ ಅವರು ಕೇವಲ ಮನುಷ್ಯರೊಂದೇ ಆಗಿ ಉಳಿಯುತ್ತಾರೆ ಎಂಬುದು ಇಲ್ಲಿ ಕವಿಯ ಭಾವ.  ಅದನ್ನೇ ಮುಂದಿನ ಪದ್ಯದಲ್ಲಿ ಇನ್ನಷ್ಟು ಸ್ಪಷ್ಟಪಡಿಸುತ್ತಾನೆ:

ವ್ರತಸಂಸ್ಕಾರದಿನಾದರ್ವಿ

ತತಗುಣರ್ ಬ್ರಾಹ್ಮಣರ್ ಕ್ರಿಯಾಸಂತತಿಸಂ

ಯುತರುಚಿತಸತ್ಕ್ರಿಯಾವಿರ

ಹಿತನಾತಂ ನಾಮಧಾರಕಂ ದ್ವಿಜನಲ್ಲಂ

 - ಆದಿಪುರಾಣ 15/15

ಹುಟ್ಟುತ್ತ ಸಾಮಾನ್ಯಮನುಷ್ಯರಾದ ಬ್ರಾಹ್ಮಣರು ಈ ವ್ರತಸಂಸ್ಕಾರಗಳಿಂದ, ಅದಕ್ಕನುಗುಣವಾದ ಕ್ರಿಯಾಕರ್ಮಗಳಿಂದ ವಿತತಗುಣರಾಗುತ್ತಾರೆ (ವಿಸ್ತರಿಸಿದ, ಉತ್ತಮಗುಣವನ್ನು ಸಂಪಾದಿಸುತ್ತಾರೆ).  ಈ ಸತ್ಕ್ರಿಯಾಸಂಸ್ಕಾರಗಳನ್ನು ಬಿಟ್ಟ ಬ್ರಾಹ್ಮಣ ಕೇವಲ ಹೆಸರಿಗೆ ಬ್ರಾಹ್ಮಣನೆನಿಸುತ್ತಾನಷ್ಟೇ, ಅವನು ದ್ವಿಜನಲ್ಲ.

ಮೇಲಿನ ಎರಡೂ ಪದ್ಯಗಳನ್ನು ವಿವರವಾಗಿ ಓದಿದರೆ, "ಮನುಷ್ಯಜಾತಿ ತಾನೊಂದೆ ವಲಂ" ಎಂಬ ಮಾತಿನಲ್ಲಿರುವ "ಒಂದೇ" ಎಂಬುದನ್ನು ಯಾವ ಅರ್ಥದಲ್ಲಿ ಬಳಸಿದ್ದೆಂಬುದು ಸ್ಪಷ್ಟವಾಗುತ್ತದೆ.  "ಒಂದೇ" ಎಂಬುದನ್ನು ಎರಡರ್ಥದಲ್ಲಿ ಬಳಸಬಹುದಷ್ಟೇ? 

1) "ಎಲ್ಲರೂ ಒಂದೇ" ಎಂಬ ಸಮಷ್ಟಿ ಅರ್ಥದಲ್ಲಿ (ನಾವೆಲ್ಲರೂ ಒಂದೇ, ಮನುಷ್ಯಜಾತಿ ಒಂದೇ, ಇತ್ಯಾದಿ); 

2) "ಒಂದೇ, ಅಷ್ಟೇ, only" ಎಂಬ ಅರ್ಥದಲ್ಲಿ (ನನ್ನ ಬಳಿ ಒಂದೇ ಪುಸ್ತಕವಿದೆ, ಒಂದೇ ನಾಯಿಯಿದೆ ಇತ್ಯಾದಿ).  

ಇಲ್ಲಿ ಒಂದೇ ಎಂಬ ಪದವನ್ನು ಬಳಸಿರುವುದು ಈ ಎರಡನೆಯ ಅರ್ಥದಲ್ಲಿ - ದ್ವಿಜಸಂಸ್ಕಾರವನ್ನು ಬಿಟ್ಟ ಬ್ರಾಹ್ಮಣನಲ್ಲಿ ಉಳಿಯುವುದು "ಮನುಷ್ಯಜಾತಿಯೊಂದೇ (ಮತ್ತೇನು ಇಲ್ಲ)" ಎಂಬ ಅರ್ಥದಲ್ಲಿ.  ಬ್ರಾಹ್ಮಣನ ಕುಲಾಚಾರವೇನು, ಅವನು ಇತರ ಮನುಷ್ಯರಿಗಿಂತ ಹೇಗೆ ಬೇರಾಗುತ್ತಾನೆ, ತನ್ನ ಕುಲಾಚಾರಗಳನ್ನು ಬಿಟ್ಟ ಬ್ರಾಹ್ಮಣ ಹೇಗೆ ಕೇವಲ ಮನುಷ್ಯನಾಗಿಯಷ್ಟೇ ಉಳಿಯುತ್ತಾನೆ, ಹೇಗೆ ಹೆಸರಿಗಷ್ಟೇ ಬ್ರಾಹ್ಮಣನಾಗಿರುತ್ತಾನೆ, ಅದರ ಮೇಲಿನ 'ದ್ವಿಜ' ಎಂಬ ಎರಡನೆಯ ಪದರವನ್ನು ಕಳೆದುಕೊಂಡು ಮನುಷ್ಯ ಎಂಬ 'ಒಂದೇ' ಪದರದಲ್ಲಿ ಉಳಿದುಬಿಡುತ್ತಾನೆ ಎಂಬ ವಿವರಣೆಯಷ್ಟೇ ಇಲ್ಲಿರುವುದು.  ಇಲ್ಲಿ "ಒಂದೇ" ತತ್ತ್ವದ ವಿಶ್ವಮಾನವದೃಷ್ಟಿಯನ್ನು ಹುಡುಕುವ ವ್ಯರ್ಥಪ್ರಯತ್ನ ಬೇಡವೇನೋ.

ಕೊನೆಯದಾಗಿ, ಇಲ್ಲಿ ವಿವರಿಸಿರುವುದು ಪಂಪನ ಮತ್ತು ಅವನ ಪಾತ್ರಗಳ ಅಭಿಪ್ರಾಯವೇ ಹೊರತು ನನ್ನದಲ್ಲ.  ಈ ವಿಷಯದ ಬಗ್ಗೆ ನನ್ನ ಅಭಿಪ್ರಾಯ ಇಲ್ಲಿ ಅಪ್ರಸ್ತುತ.

ಅಂದ ಹಾಗೆ, "ಬೇಱಾದರ್ ದ್ವಿಜರುಂತೇಂ ಬೇಱುಂಟೆ ಮನುಷ್ಯಜಾತಿ ತಾನೊಂದೆ ವಲಂ" ಎಂಬುದೂ ಪಂಪನೇ ಸ್ವತಃ ಮಾಡಿಕೊಂಡ ಅಭಿಪ್ರಾಯವೂ ಅಲ್ಲ. ಪಂಪನ ಆದಿಪುರಾಣದ ಆಕರವಾದ ಜಿನಸೇನಾಚಾರ್ಯರ ಮಹಾಪುರಾಣದ (ಪೂರ್ವಪುರಾಣ/ಆದಿಪುರಾಣ) 38ನೆಯ ಅಧ್ಯಾಯದ ಈ ಕೆಳಗಿನ ಶ್ಲೋಕಗಳನ್ನು ಗಮನಿಸಬಹುದು (ಬ್ರಾಕೆಟ್ಟಿನಲ್ಲಿ ಅದರ ಸ್ಥೂಲ ಅರ್ಥವನ್ನೂ ವಿವರಿಸಿದ್ದೇನೆ - ಪಂಪನು ತನ್ನ ಆದಿಪುರಾಣದಲ್ಲೂ ಇದೇ ಅಭಿಪ್ರಾಯವನ್ನೇ ಯಥಾವತ್ತಾಗಿ ತಂದಿದ್ದಾನೆ ):

ವಿಶುದ್ಧಾ ವೃತ್ತಿರೇವೈಷಾಂ ಷಟ್ತಯೋಷ್ಟಾ ದ್ವಿಜನ್ಮನಾಂ

ಯೋऽತಿಕ್ರಾಮೇದಿಮಾಂ ಸೋऽಜ್ಞೋ ನಾಮ್ನೈವ ನ ಗುಣೈರ್ದ್ವಿಜಃ ||42||

(ಮೇಲೆ ಹೇಳಿದ ಷಟ್ಕರ್ಮಗಳು (ಪೂಜಾ, ದಾನ, ಸ್ವಾಧ್ಯಾಯ, ಇತ್ಯಾದಿ) ದ್ವಿಜರಿಗೆ ಆಚರಣೀಯ.  ಇವನ್ನು ಅತಿಕ್ರಮಿಸುವ ಅಜ್ಞನು ಕೇವಲ ಹೆಸರಿಗಷ್ಟೇ ದ್ವಿಜನಾಗಿರುತ್ತಾನೆ, ಗುಣದಿಂದಲ್ಲ)

ತಪಃ ಶ್ರುತಂಚ ಜಾತಿಶ್ಚ ತ್ರಯಂ ಬ್ರಾಹ್ಮಣ್ಯಕಾರಣಮ್

ತಪಶ್ರುತಾಭ್ಯಾಂ ಯೋ ಹೀನೋ ಜಾತಿಬ್ರಾಹ್ಮಣ ಏವ ಸಃ ||43||

(ತಪಸ್ಸು, ಶಾಸ್ತ್ರಜ್ಞಾನ ಮತ್ತು ಜಾತಿ ಇವು ಮೂರು ಬ್ರಾಹ್ಮಣ್ಯಕ್ಕೆ ಕಾರಣಗಳು.  ತಪಸ್ಸು ಮತ್ತು ಶಾಸ್ತ್ರಜ್ಞಾನವಿಲ್ಲದಾತ ಕೇವಲ ಜಾತಿಬ್ರಾಹ್ಮಣನಷ್ಟೇ)

ಮನುಷ್ಯಜಾತಿರೇಕೈವ ಜಾತಿನಾಮೋದಯೋದ್ಭವಾ

ವೃತ್ತಿಭೇದಾಹಿತಾದ್ಭೇದಾಚ್ಚಾತುರ್ವಿಧ್ಯಮಿಹಾಶ್ನುತೇ ||45||

(ಮೂಲತಃ ಮನುಷ್ಯಜಾತಿಯೊಂದೇ, ಆದರೆ ಜೀವನೋಪಾಯಕ್ಕಾಗಿ ಮಾಡುವ ನಾಲ್ಕು ವಿಧದ ಕರ್ಮಗಳಿಂದಾಗಿ ಅದು ನಾಲ್ಕು ವಿಧದ ಜಾತಿಯಾಗಿ ಪರಿಣಮಿಸುತ್ತದೆ)

ಬ್ರಾಹ್ಮಣಾ ವ್ರತಸಂಸ್ಕಾರಾತ್ ಕ್ಷತ್ರಿಯಾಃ ಶಸ್ತ್ರಧಾರಣಾತ್

ವಣಿಜೋಽರ್ಥಾರ್ಜನಾನ್ಯಾಯಾಚ್ಛೂದ್ರಾನ್ಯಗ್ವೃತ್ತಿಸಂಶ್ರಯಾತ್ ||46||

(ವ್ರತಸಂಸ್ಕಾರದಿಂದ ಬ್ರಾಹ್ಮಣ, ಶಸ್ತ್ರಧಾರಣದಿಂದ ಕ್ಷತ್ರಿಯ, ನ್ಯಾಯಬದ್ಧವಾದ ಧನಾರ್ಜನದಿಂದ ವೈಶ್ಯ ಮತ್ತು ಇತರ ವೃತ್ತಿಗಳಿಂದ ಶೂದ್ರ - ಹೀಗಾಗುತ್ತದೆ).

ದ್ವಿರ್ಜಾತೋ ಹಿ ದ್ವಿಜನ್ಮೇಷ್ಟಃ ಕ್ರಿಯಾತೋ ಗರ್ಭತಶ್ಚ ಯಃ

ಕ್ರಿಯಾಮಂತ್ರವಿಹೀನಸ್ತು ಕೇವಲಂ ನಾಮಧಾರಕಃ ||48||

(ದ್ವಿಜನೆಂದರೆ ಎರಡು ಜನ್ಮ ತಾಳಿದವನು - ಗರ್ಭದಿಂದ ಮೊದಲನೆಯ ಜನ್ಮ, ಕ್ರಿಯೆಯಿಂದ (ಸಂಸ್ಕಾರದಿಂದ) ಎರಡನೆಯದು.  ಕ್ರಿಯಾಮಂತ್ರವಿಹೀನನಾದ ಬ್ರಾಹ್ಮಣನು ಕೇವಲ ಹೆಸರಿಗಷ್ಟೇ ಬ್ರಾಹ್ಮಣನಾಗಿರುತ್ತಾನೆ)

ನೆನಪಿರಲಿ, ಮೇಲಿನ ಯಾವ ಉಲ್ಲೇಖಗಳೂ ವೈದಿಕ ಉಲ್ಲೇಖಗಳಲ್ಲ, ಸ್ವತಃ ಪಂಪನೇ ಆಕರವಾಗಿರಿಸಿಕೊಂಡಿರುವ ಜೈನರ ಪವಿತ್ರಗ್ರಂಥವಾದ ಮಹಾಪುರಾಣದ್ದು.  ಆದರೆ ಇವನ್ನು ನೋಡಿದಾಗ, ವೈದಿಕವಲಯದಿಂದ ಈ ಕೆಳಕಂಡ ಶ್ಲೋಕಗಳೂ ನೆನಪಾದರೆ ಅದು ಅಸಹಜವಲ್ಲ:

ಜನ್ಮನಾ ಜಾಯತೇ ಶೂದ್ರಃ ಸಂಸ್ಕಾರಾತ್ ದ್ವಿಜ ಉಚ್ಯತೇ

ವೇದಜ್ಞಾನೇನ ವಿಪ್ರತ್ವಂ ಬ್ರಹ್ಮಜ್ಞಾನೇನ ಬ್ರಾಹ್ಮಣಃ

(ಹುಟ್ಟುವಾಗ ಎಲ್ಲರೂ ಶೂದ್ರರಿರುತ್ತಾರೆ, ಉಪನಯನಸಂಸ್ಕಾರದಿಂದ ದ್ವಿಜರೆನಿಸಿಕೊಳ್ಳುತ್ತಾರೆ, ವೇದಜ್ಞಾನದಿಂದ ವಿಪ್ರರಾಗುತ್ತಾರೆ, ಬ್ರಹ್ಮಜ್ಞಾನದಿಂದ ಬ್ರಾಹ್ಮಣರಾಗುತ್ತಾರೆ)

ಚಾತುರ್ವರ್ಣ್ಯಂ ಮಯಾ ಸೃಷ್ಟಂ ಗುಣಕರ್ಮವಿಭಾಗಶಃ (ಭಗವದ್ಗೀತಾ)

(ಗುಣಕರ್ಮವಿಶೇಷಗಳಿಗನುಗುಣವಾಗಿ ನಾಲ್ಕು ವರ್ಣಗಳು ನನ್ನಿಂದ ಸೃಷ್ಟಿಸಲ್ಪಟ್ಟಿವೆ)

ಶೂದ್ರೇಣ ಹಿ ಸಮಸ್ತಾವತ್ ಯಾವದ್ವೇದೇ ನ ಜಾಯತೇ (ಮನುಸ್ಮೃತಿ)

ಉಪನಯನವೇ ಮೊದಲಾದ ದ್ವಿಜಸಂಸ್ಕಾರಗಳಾಗುವವರೆಗೆ ಎಲ್ಲರೂ ಶೂದ್ರರೇ.

ಈ ಕೊನೆಯ ಮೂರು ಉಲ್ಲೇಖಗಳನ್ನು ನೋಡಿದ ಮೇಲೆ, ಇದುವರೆಗೆ ಮಹಾನ್ ಮಾನವತಾವಾದಿಯಾಗಿದ್ದ ಪಂಪನೂ ಇದ್ದಕ್ಕಿದ್ದಂತೆ ವೈದಿಕವಾದಿ, ಬ್ರಾಹ್ಮಣವಾದಿ, ಭಗವದ್ಗೀತಾವಾದಿ, ಮನುವಾದಿ ಹೀಗೆಲ್ಲ ಕಾಣತೊಡಗಿದರೆ ತಪ್ಪು ನನ್ನದಲ್ಲ.  ನಮಗಂತೂ "ಪಸರಿಪ ಕನ್ನಡಕ್ಕೊಡೆಯನೊರ್ವನೆ ಸತ್ಕವಿ ಪಂಪನಾವಗಂ" - ಆವಗಂ!!!

1 comment:

Adarsh SG said...

Good information sir, Thank you